ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪರವರು ನಿಧನ ಹೊಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ಶಾಮನೂರು ರವರು ತನ್ನ 94 ನೇ ವಯಸ್ಸಿನಲ್ಲಿ ಡಿಸೆಂಬರ್ 14, 2025 ರಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಆದಿತ್ಯವಾರ ಸಂಜೆ ಮೃತಪಟ್ಟಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ ಸಿದ್ದರಾಮಯ್ಯ ತಿಳಿಸಿದ್ದಾರೆ.





