ಬೆಳಗಾವಿ: ಆಸ್ತಿ ದಾಖಲೆ ಪಡೆಯುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗೆ ತೆರಳಿದ್ದ ತಂದೆ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಮೃತರು. ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ತಿ ಹಂಚಿಕೆ ವಿಚಾರವಾಗಿ ರುದ್ರಪ್ಪ ಹಾಗೂ ಅವರ ಸಹೋದರರ ನಡುವೆ ವಿವಾದವಿತ್ತು ಎನ್ನಲಾಗಿದೆ. ಆಸ್ತಿ ಪಾಲುದಾರಿಕೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸಲು ರುದ್ರಪ್ಪ ಅವರು ಗ್ರಾಮ ಪಂಚಾಯಿತಿಗೆ ಬಂದಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.
ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.





