ರಾಜ್ಯ ಕಾಂಗ್ರೆಸ್ ಸರಕಾರದ ಬಗ್ಗೆ ಬಿಜೆಪಿ ಸುಳ್ಳು ಮಾಹಿತಿ ಹರಡುತ್ತಿದೆ ಎಂಬ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ರಾಜ್ಯ ಸರಕಾರ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬಿಜೆಪಿ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ಸರಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರುವ ಹಾಗೆ ಮಾಡುತ್ತಾರೆ ಎನ್ನುವ ಆರೋಪದಡಿಯಲ್ಲಿ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ನ್ಯಾಯಾಲದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದೆ.
ಮೇ 20 ರಂದು ರಾಜ್ಯ ಸರಕಾರ ತನ್ನ 2 ವರ್ಷದ ಆಳ್ವಿಕೆಯಲ್ಲಿ ನಡೆದ ಪ್ರಗತಿ ಕಾರ್ಯಗಳ ಬಗ್ಗೆ ಹೊಸಪೇಟೆಯ ವಿಜಯನಗರದಲ್ಲಿ ಸಮಾವೇಶ ನಡೆಸಿ ಜನತಗೆ ತಿಳಿಸಿತ್ತು. ಆದರೆ ಕಾಂಗ್ರೆಸ್ ಎಲ್ಲಾ ರಂಗಗಳಲ್ಲೂ ವಿಫಲವಾಗಲಿದೆ ಎಂದು ಆರೋಪಿಸಿದ್ದ ಬಿಜೆಪಿ ಆ ಕಾರ್ಯಕ್ರಮವನ್ನು ' ರಾಜ್ಯ ಸರಕಾರದ 2 ವರ್ಷದ ವೈಫಲ್ಯದ ಸಮಾವೇಶ' ಎಂದು ಬಿಜೆಪಿ ಬಿಂಬಿಸಿತ್ತು. ಈ ಮೂಲಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ವಿಚಾರವಾಗಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ "ಬಿಜೆಪಿಯವರು ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಬರುವ ಹಾಗೆ ಮಾಡುತ್ತಿದ್ದಾರೆ ಹೀಗಿರುವಾಗ ಸುಮ್ಮನೆ ಇರೋದಕ್ಕೆ ಸಾಧ್ಯನಾ? ಎಂದು ಪ್ರಶ್ನಿಸಿದರು. ಸರಕಾರದ ವಿರುದ್ಧ ಮಾತನಾಡಿದರೆ ಸುಮ್ಮನೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ.
ರಾಜ್ಯ ಸರಕಾರದ ಎರಡು ವರ್ಷಗಳ ವೈಫಲ್ಯತೆ ಬಗ್ಗೆ 'ಆರೋಪ ಪಟ್ಟಿ' ಎಂಬ ಶೀರ್ಷಿಕೆಯಡಿಯಲ್ಲಿ ದೃಶ್ಯ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರದ ಮಾಡಿರುವ ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲದಲ್ಲಿ ಮೊಕದ್ದಮೆ ದಾಖಲಾಗಿದ್ದು ಮುಂದಿನ ತನಿಖೆ ನಡೆಯಲಿದೆ.
ಬಿಜೆಪಿ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತನ್ನ ಎಕ್ಸ್ ಅಕೌಂಟ್ ನಲ್ಲಿ ಟ್ವೀಟ್ ಮಾಡಿ ' ಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು.
ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತ್ತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು.
ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ʼಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆʼ ಎಂಬುದನ್ನು ಪ್ರತಿಬಿಂಬಿಸುತ್ತಿದೆ.
ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ @BJP4Karnataka ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ.
ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ,ಹಾಗೂ ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ
@INCKarnataka ಸರಕಾರ ಎದುರು ನೋಡಲಿದೆ.
#CongressFailsKarnataka
ಎಂದು ಬರೆದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.