ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮತ್ತೆ ಇಬ್ಬರು ಬಿಜೆಪಿ ಶಾಸಕರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮತ್ತಿಬ್ಬರನ್ನು ಬಿಜೆಪಿ ಹೈ ಕಮಾಂಡ್ ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.
ಬಿಜೆಪಿಯಲ್ಲೇ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚಾಗಿ ಕಾಣಿಸಿಕೊಂಡ ಪರಿಣಾಮ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಆಗಿದ್ದು, ಬೆಂಗಳೂರಿನ ಯಶವಂತಪುರದಿಂದ ಎಸ್ ಟಿ ಸೋಮಶೇಖರ್ ಶಾಸಕರಾಗಿದ್ದಾರೆ.
ಮೂರು ಬಾರಿ ಶಾಸಕರಾಗಿದ್ದ ಎಸ್ ಟಿ ಸೋಮಶೇಖರ್ ಕಳೆದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಸಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದರು. ಕಳೆದ ಕೆಲವು ದಿನಗಳಿಂದ ಈ ಇಬ್ಬರು ಶಾಸಕರುಗಳು ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದು, ಪಕ್ಷಕ್ಕೆ ವಿರೋಧವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದರು.
ಬಿಜೆಪಿಯಿಂದ ಉಚ್ಚಾಟನೆ ಶಿವರಾಂ ಹೆಬ್ಬಾರ್ ಹೇಳಿದ್ದೇನು?
ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಉತ್ತರ ಕನ್ನಡ ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದಿದ್ದಾರೆ. ನನ್ನ ಮುಂದಿನ ತೀರ್ಮಾನದ ಬಗ್ಗೆ ಕಾದು ನೋಡಿ. ನಮಗೆ ಆಗಿರುವ ಲಾಭ ನಷ್ಟದ ಬಗ್ಗೆ ನಾವು ಯೋಚನೆ ಮಾಡ್ತೀವಿ ಅದರ ಜೊತೆಗೆ ಬಿಜೆಪಿಗೆ ಆಗುವ ಲಾಭ ನಷ್ಟದ ಬಗ್ಗೆ ಅವರು ತೀರ್ಮಾನ ಮಾಡಲಿ ಎಂದಿದ್ದಾರೆ. ಮುಂದಿನ ವಾರ ಬೆಂಗಳೂರಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ಯಸ್ ವಿಜಯೇಂದ್ರ ಪಕ್ಷದ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಅಮಾನತುಗೊಂಡ ಇಬ್ಬರು ಶಾಸಕರು ಎಂದು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುವುದು ಅವರಿಗೆ ಗೊತ್ತಿದೆ. ನಮ್ಮ ಆಂತರಿಕ ವಿಷಯಗಳಿಗೆ ಡಿಕೆ ಶಿವಕುಮಾರ್ ತಲೆಕೆಡಿಸುವುದು ಬೇಡ ಎಂದಿದ್ದಾರೆ.