20 June 2025 | Join group

ಗುಂಡೂರಾವ್ ರವರು ದ.ಕ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ? ಸಿಎಂ ನಿವಾಸದಲ್ಲಿ ಮಹತ್ವದ ಸಭೆ

  • 29 May 2025 08:51:15 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಸರಣಿ ಕೊಲೆಗಳು ಮತ್ತು ಕೋಮುಗಲಭೆಗಳು ಹೆಚ್ಚಾಗುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಕಷ್ಟವಾಗಲಿದೆ ಎಂದು ಅರಿತ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತನ್ನ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

 

ಸಚಿವರು ಮುಖ್ಯಮಂತ್ರಿಯವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ಮುಕ್ತಿಗೊಳಿಸಬೇಕೆಂದು ಬೇಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈಗಾಗಲೇ ಮುಖ್ಯಮಂತ್ರಿ ನಿವಾಸದಲ್ಲಿ ಗೃಹ ಸಚಿವ ಪರಮೇಶ್ವರ್, ಡಿಜಿಪಿ ಡಾ. ಎಂ.ಎ. ಸಲೀಂ ಮತ್ತು ಇತರ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆದಿದೆ.

 

ಮೂಲಗಳ ಪ್ರಕಾರ, ಈಗಾಗಲೇ ಸಚಿವ ಗುಂಡೂರಾವ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗಿಳಿಯಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಗುಂಡೂರಾವ್ ಜೊತೆಗೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ಕೂಡ ಎತ್ತಂಗಡಿ ಮಾಡುವ ಬಗ್ಗೆ ಆಂತರಿಕ ಚರ್ಚೆ ನಡೆದಿದೆ ಎನ್ನಲಾಗಿದ್ದು ಯಾವುದೇ ಸಮಯದಲ್ಲೂ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಡಲಾಗಿದೆ.

 

ಕಳೆದ ಒಂದು ತಿಂಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಗೊಂದಲಗಳು ನಡೆಯುತ್ತಿದ್ದು, ಸುಹಾಸ್ ಶೆಟ್ಟಿ ಕೊ*ಲೆ ಪ್ರಕರಣದ ನಂತರ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ. ಸುಹಾಸ್ ಪ್ರಕರಣವನ್ನು ಎನ್ಐಎ ಗೆ ಒಪ್ಪಿಸಬೇಕೆಂದು ಹಿಂದೂ ಸಂಘಟನೆಗಳು ಬೇಡಿಕೊಂಡಿದ್ದು, ಆ ಪ್ರಕರಣವನ್ನು ಎನ್ಐಎ ಒಪ್ಪಿಸುವ ಅಗತ್ಯತೆ ಇಲ್ಲ ಎಂದು ಉಸ್ತುವಾರಿ ಸಚಿವ ಗುಂಡೂರಾವ್ ಹೇಳಿಕೆ ಕೊಟ್ಟಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಸಚಿವರುಗಳು ಮತ್ತು ಪೊಲೀಸ್ ಇಲಾಖೆ ಸರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರಕಾರ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.