ಬಂಟ್ವಾಳ : ಕೋಮು ಸಾಮರಸ್ಯವನ್ನು ಕದಡುವ ಮತ್ತು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಿದ್ದಾರೆ ಎಂಬ ಕಾರಣದಿಂದ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕವಳಪಡೂರು ಗ್ರಾಮದ ಮಾಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಅವರು ಮಾಡಿದ ಭಾಷಣದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಮಾಡಲಾಗಿದೆ.
ಹ*ತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಸ್ಮರಣಾರ್ಥ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಎರಡು ಕೋಮುಗಳ ನಡುವೆ ದ್ವೇಷವನ್ನು ಉಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪದಲ್ಲಿ ನಮೂದಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 500 ಜನರು ನೆರೆದಿದ್ದ ಆ ಕಾರ್ಯಕ್ರಮದಲ್ಲಿ ಸಂತಾಪ ಸೂಚನಾ ಕಾರ್ಯಕ್ರಮವನ್ನು ಉದ್ದೇಶಿಸಿ ಭಟ್ ಅವರು ಮಾತನಾಡಿದ್ದರು.
ಅವರು ಮಾಡಿದ ಭಾಷಣದ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು, ಜೂನ್ 2 ರಂದು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ ಸೆಕ್ಷನ್ 353(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.