ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 12 ರಿಂದ ಸುರಿಯುತ್ತಿರುವ ಮಳೆಯಿಂದ ಮಂಗಳೂರು ನಗರ ಮತ್ತು ಇನ್ನಿತರ ಪ್ರದೇಶಗಳಲ್ಲಿ ಬಹಳಷ್ಟು ಹಾನಿಯಾಗಿದೆ. ತಗ್ಗು ಪ್ರದೇಶಗಳು ಮುಳುಗಡೆಯಾಗಿರುವ ಬಗ್ಗೆ ವರದಿಯಾಗಿದೆ.
ಮನೆಗಳ ಗೋಡೆ ಕುಸಿತ, ಕಾಂಪೌಂಡ್ ಕುಸಿತ, ಗುಡ್ಡೆ ಕುಸಿತವಾಗಿ ಮಾರ್ಗಗಳ ಸಂಚಾರಕ್ಕೆ ತೊಂದರೆಯಾದ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬಂದಿದೆ. ಮುನ್ನೆಚೆರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜೂನ್ 16 ರಂದು ರಜೆ ಕೂಡ ಘೋಷಿಸಲಾಗಿದೆ.
ಆದರೆ, ಈ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈಗಾಗಲೇ ಹವಾಮಾನ ಇಲಾಖೆ ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡಲಾಗಿದೆ.