ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ವಿಧಾನಸಭಾ ಕ್ಷೇತ್ರದ ಮೇಲೆ ಕರುಣೆ ತೋರಿಸಿದಂತಿದೆ. ತಮ್ಮ ಕ್ಷೇತ್ರಗಳಿಗೆ ಸರಿಯಾದ ಅನುದಾನ ಸಿಗುತ್ತಿಲ್ಲವೆಂದು ಹಲವಾರು ವಿಧಾನಸಭಾ ಕ್ಷೇತ್ರಗಳಿಂದ ಕೂಗು ಕೇಳಿಬಂದಿತ್ತು.
ಈ ಎಲ್ಲದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡುವ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಅನುದಾನ ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.
ಹಿಂದೆ ಕೇವಲ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಈ ವಿಚಾರವಾಗಿ ವಿಪಕ್ಷಗಳಿಂದ ಸಿಎಂ ನೀತಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿತ್ತು. ಇದರ ಪರಿಣಾವಾಗಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಕ್ಷೇತ್ರಗಳು ಸೇರಿದಂತೆ ಇತರ ವಿರೋಧ ಪಕ್ಷಗಳ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು.
ಈ ಬಾರಿ ಕಾಂಗ್ರೆಸ್ ಶಾಸಕರ ಜೊತೆಗೆ ವಿರೋಧ ಪಕ್ಷಗಳ ಶಾಸಕರು ಕೂಡ ಅನುದಾನ ಪಡೆಯಲಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುವ ಸಾಧ್ಯತೆ ಹೆಚ್ಚಿದೆ.
ಅನುದಾನದ ಕೊರತೆಯಿಂದಾಗಿ ರಸ್ತೆಗಳು ಮತ್ತು ಇನ್ನಿತರ ಸಾರ್ವಜನಿಕ ವ್ಯವಸ್ಥೆಗಳಲ್ಲಿ ಸರಿಯಾದ ದುರಸ್ತಿ ಕಾರ್ಯಗಳು ನಡೆಯದೇ ಇದ್ದ ಪ್ರದೇಶಗಳಲ್ಲಿ ಇನ್ನು ಮುಂದೆಯಾದರೂ ಪ್ರಗತಿ ಕಾಣುವ ಕನಸನ್ನು ಸಾರ್ವಜನಿಕರು ಕಾಣಲಿದ್ದಾರೆ ಎನ್ನಲಾಗಿದೆ.





