ಸರಗಳ್ಳತನ ಆರೋಪದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

  • 14 Oct 2025 06:09:45 PM

ಮಂಗಳೂರು: ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೋಣಾಜೆ ಬಳಿಯ ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆಯಲ್ಲಿ ನಡೆದಿದೆ.

 

28 ವರ್ಷದ ಮುಹಮ್ಮದ್ ನಿಯಾಫ್ ಮೃತ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೊಬ್ಬರು ತಮ್ಮ ಬೈಕ್ ನ್ನು ಬಸ್ ನಿಲ್ದಾಣದ ಬಳಿ ನಿಲ್ಲಿಸಲು ಹೋಗಿದ್ದಾಗ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ಯುವಕ ಬಾವಿಯ ರಿಂಗ್ ತಯಾರಿಕೆ ಕೆಲಸ ಮಾಡುತ್ತಿದ್ದ. ಯುವಕನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

 

ನಿಯಾಫ್ ವಿರುದ್ಧ ಕೆಲ ದಿನಗಳ ಹಿಂದೆ ಮುದುಂಗಾರುಕಟ್ಟೆ ಬಳಿ ಮಹಿಳೆಯರ ಸರಗಳ್ಳತನ ಮಾಡ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ನಿಯಾಫ್ ಶವವಾಗಿ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.